ನ್ಯಾಯದಲ್ಲಿ ರಾಜಿ ಬೇಡ: ಪೊಲೀಸರಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ
ಟಿಒಬಿ ನ್ಯೂಸ್ ಮೈಸೂರು
ನ್ಯಾಯವಿತರಣೆಯಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗಬಾರದು ಎಂದು ಪೊಲೀಸರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮೈಸೂರು ಘಟಕದ 46ನೇ ಬ್ಯಾಚ್ ಸಿವಿಲ್ ಪೊಲೀಸ್ ಉಪನಿರೀಕ್ಷಕರ ಪಾಸಿಂಗ್ ಔಟ್ ಪಥಸಂಚಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ ಮತ್ತು ಮಾನವೀಯತೆ ಅತ್ಯಂತ ಮುಖ್ಯವೆಂದು ಹೇಳಿದರು.
ಸಮಾಜದಲ್ಲಿನ ದೀನ ದಲಿತರು, ಮಹಿಳೆಯರು ಹಾಗೂ ದುರ್ಬಲ ವರ್ಗಗಳ ರಕ್ಷಣೆ ಪೊಲೀಸರ ಮುಖ್ಯ ಜವಾಬ್ದಾರಿಯಾಗಿದೆ.
ಗಾಂಧೀಜಿ ಅವರ ಮಾತುಗಳನ್ನು ಉಲ್ಲೇಖಿಸಿ, ಮಧ್ಯರಾತ್ರಿ ಮಹಿಳೆಯರು ಭಯವಿಲ್ಲದೆ ಓಡಾಡುವಂತಾದಾಗ ಮಾತ್ರ ನಿಜವಾದ ಸ್ವಾತಂತ್ರ್ಯ ದೊರೆಯುತ್ತದೆ ಎಂದು ಹೇಳಿದರು.
ಈ ವೇಳೆ 377 ಮಂದಿ ಸಬ್ ಇನ್ಸ್ಪೆಕ್ಟರ್ಗಳು ಸೇವೆಗೆ ಸೇರ್ಪಡೆಯಾಗಿದ್ದು, ಕಳೆದ ಮೂರು ವರ್ಷಗಳಲ್ಲಿ 4911 ಹುದ್ದೆಗಳು ಭರ್ತಿಯಾಗಿವೆ. ಇನ್ನೂ 8000 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಬಜೆಟ್ನಲ್ಲಿ ಘೋಷಿಸಿರುವುದಾಗಿ ತಿಳಿಸಿದರು. ಸರ್ಕಾರ ಸದಾ ಪೊಲೀಸರ ಬೆಂಬಲದಲ್ಲಿರುತ್ತದೆ ಎಂದು ಭರವಸೆ ನೀಡಿದರು.
ಮಾದಕವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಕರೆ ನೀಡಿ, ಠಾಣಾ ಮಟ್ಟದಲ್ಲೇ ಮಾದಕವಸ್ತು ತಯಾರಿ ಮತ್ತು ಮಾರಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಯುವಜನಾಂಗದ ಮೇಲೆ ಇದರ ಪರಿಣಾಮ ಗಂಭೀರವಾಗಿದ್ದು, ಸಮಾಜದ ಆರೋಗ್ಯ ಕಾಪಾಡಲು ಇದನ್ನು ನಿರ್ಮೂಲನೆ ಮಾಡುವುದು ಅಗತ್ಯವೆಂದರು.
ಪೊಲೀಸರು ಮಾನವೀಯತೆಯಿಂದ ವರ್ತಿಸಿ, ಸಾರ್ವಜನಿಕರೊಂದಿಗೆ ಸ್ನೇಹಪೂರ್ಣ ಸಂಬಂಧ ಹೊಂದಬೇಕು. ನಿರಪರಾಧಿಗಳಿಗೆ ಕರುಣೆ ತೋರಬೇಕು, ಆದರೆ ಅಪರಾಧಿಗಳ ವಿರುದ್ಧ ಯಾವುದೇ ಸಡಿಲಿಕೆ ತೋರಬಾರದು ಎಂದು ಹೇಳಿದರು. ಸೈಬರ್ ಅಪರಾಧಗಳ ನಿಯಂತ್ರಣಕ್ಕೆ ನೀಡಿರುವ ತರಬೇತಿಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.
ಅಂಬೇಡ್ಕರ್ ಅವರ ಉಲ್ಲೇಖ ನೀಡಿ, ಅಧಿಕಾರ ಮತ್ತು ಹಣಬಲದ ದುರುಪಯೋಗಕ್ಕೆ ಒಳಗಾಗದೆ ಧೈರ್ಯದಿಂದ ಕಾರ್ಯನಿರ್ವಹಿಸುವಂತೆ ಪೊಲೀಸರಿಗೆ ಕಿವಿಮಾತು ಹೇಳಿದರು.
