* ಅಪ್ಪನ ವಚನಗಳು:- ಶಿವಯೋಗಿಗಳಿಗೆ ಬಸವಣ್ಣನವರು ಎಲ್ಲ ವಿಧದಲ್ಲಿಯೂ ಮೇಲ್ಪಂಕ್ತಿ ಆಗಿದ್ದರು.
ಶರಣರ ವಿಚಾರಗಳನ್ನು ಹೇಳುವುದು ಸರಳ, ಆದರೆ ಆಚರಿಸುವುದು ಕಷ್ಟ .ಆದರೆ ಶಿವಯೋಗಿಗಳಿಗೆ ಬಸವ ತತ್ವ ಆಚರಣೆ ಕಷ್ಟವಾಗಿರಲಿಲ್ಲ, ಇಷ್ಟವಾಗಿತ್ತು .ಕಾಶಿಯಿಂದ ಬಂದ ಸಂಸ್ಕೃತ ಪಂಡಿತ ಬೃಹತ್ತಾದ ಸಂಸ್ಕೃತ ಗ್ರಂಥ ತಂದುಕೊಟ್ಟ. ತಾವು ಇದನ್ನು ಓದಬೇಕೆಂದು ಒತ್ತಾಯಿಸುತ್ತಾನೆ. ನಾನು ಈಗಾಗಲೇ ಒಂದು ಗ್ರಂಥ ಓದುತ್ತಿದ್ದೇನೆ. ನಿಮ್ಮ ಹತ್ತಿರವೇ ಇರಲಿ ಎಂದು ನಯವಾಗಿ ಗುರುಗಳು ನಿರಾಕರಿಸಿದರು. ಮತ್ತೆ ಆ ಪಂಡಿತ ಬುದ್ಧೀ ಅದು ಮುಗಿದ ಮೇಲಾದರೂ ಇದನ್ನು ಓದಲೇಬೇಕೆಂದು ಒತ್ತಾಯಿಸಿದಾಗ” ಈ ಜನ್ಮ ಮುಗಿಯುವವರೆಗೂ ಅದು ಸಾಧ್ಯವಿಲ್ಲಪ್ಪಾ ಅದು ಮುಗಿಯದ ಮಾಣಿಕ್ಯ ದೀಪ್ತಿ” ಎನ್ನುತ್ತಾರೆ .ಯಾವುದದು ಬುದ್ಧಿ ಎಂದ. ಅದು” ಶರಣರ ವಚನ ಸಾಹಿತ್ಯ ದರ್ಶನ” ನಮಗೆಲ್ಲ ಅದೇ ದಾರಿದೀಪ ಶಾಸ್ತ್ರಿಗಳೆ ಎಂದು ವಚನಗಳ ಮನ್ನಣೆಯನ್ನು ಎತ್ತಿ ತೋರಿಸುತ್ತಾರೆ.
ಮೈಸೂರಿನ ಕಡ್ಲೆಪುರಿ ನಂಜುಂಡಪ್ಪನವರು ಸೊಗಸಾದ ಮಂಚ ತಂದು, ಗಾದೆ -ಕುತನಿ ಅರಿವೇ ಹಾಸಿ, ಅಪ್ಪಾ ತಾವು ಇದರ ಮೇಲೆ ನಿತ್ಯವೂ ಪವಡಿಸಬೇಕು ಎಂದು ಪ್ರಾರ್ಥಿಸುತ್ತಾರೆ.” ಹೌದಪ್ಪಾ ಇದು ನಮ್ಮ ಅಪ್ಪನ ವಚನಗಳು ಇರಬೇಕಾದ ಸ್ಥಳ” ಎಂದು ಬಸವಣ್ಣನವರ ವಚನಗಳನ್ನು ಇಟ್ಟು ಸಾಷ್ಟಾಂಗವೆರಗುತ್ತಾರೆ. ಎಂತಹ ಸೇವಾಭಾವ ಶಿವಯೋಗಿಗಳದು.
“ಈಶನ ಮೀಸಲಪ್ಪ ಭಕ್ತ” ಎಂದು ಹರಿಹರ ಬಸವಣ್ಣನವರನ್ನು ಬಣ್ಣಿಸುತ್ತಾನೆ. ಅದರಂತೆ ಬಸವಣ್ಣನವರ ಮೀಸಲು ಭಕ್ತಿ ಶಿವಯೋಗಿಗಳದು. ಬಸವಣ್ಣನವರನ್ನು ಅಪ್ಪಾ ಎಂದೇ ಕರೆಯುತ್ತಿದ್ದರು. ಅಪ್ಪನ ವಚನಗಳು ಎಂದೇ ಸಂಭೋದಧಿಸುತ್ತಿದ್ದರು. ಅವರಿಗೆ ವಚನಗಳೇ ಮಂತ್ರಗಳು ,ಬಸವಣ್ಣನೇ ಬಾಳ ಜ್ಯೋತಿ, ಸಮತೆಯೇ ಕಂತೆ, ದಾಸೋಹವೇ ದೀಪ್ತಿ, ಸಹಜ- ಸರಳ ಜೀವನವೇ ಶಿವಯೋಗದ ಶಿವ ಸಿದ್ಧಿಯಾಗಿತ್ತು.
ಶಿವಯೋಗಿಗಳು ಬಸವಣ್ಣನವರ ವಚನಗಳನ್ನು ಅಪ್ಪನ ವಚನಗಳೆಂದು ಅಪ್ಪಿ- ಒಪ್ಪಿ ಬಸವತತ್ವದಲ್ಲಿಯೇ ಬದುಕಿದರು .ಬಯಸಿ ಬಂದದು ಅಂಗಭೋಗ. ಬಯಸದೇ ಬಂದುದು ಲಿಂಗಭೋಗ ಎಂದು ಬಾಗಿದ ತಲೆ ಮುಗಿದ ಕೈಯಾಗಿ ಬಾಳಿದ ಯುಗಪುರುಷರು. ಇನ್ನು ಶಿವನ ಆಜ್ಞೆ ಆಗಿದೆ ನಾನು ಬರುತ್ತೇನೆ. ನೀವೆಲ್ಲ ಬಸವ ಭಕ್ತಿ ಮಾರ್ಗದಲ್ಲಿ ನಡೆಯಿರಿ ಎಂದು ಅಪ್ಪಣೆ ಮಾಡಿ ದಿನಾಂಕ: 23.4. 1921ರಂದು ಶನಿವಾರ ಶಿವಯೋಗದ ಬಯಲಿನಲ್ಲಿ
ಬಯಲಾದರು. *
