ಗರ್ಭಕಂಠದ ಕ್ಯಾನ್ಸರ್ ತಡೆಗೆ ‘ಹೆಚ್ಪಿವಿ’ ಲಸಿಕೆ ಶ್ರೀರಕ್ಷೆ
ಟಿಓಬಿ ನ್ಯೂಸ್
ಮಹಿಳೆಯರನ್ನು ಕಾಡುವ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಲ್ಲಿ ಹೆಚ್.ಪಿ.ವಿ ಲಸಿಕೆ ಅತ್ಯಂತ ಪರಿಣಾಮಕಾರಿಯಾಗಿದ್ದು, ಅರ್ಹ ವಯಸ್ಸಿನ ಹೆಣ್ಣುಮಕ್ಕಳಿಗೆ ಪೋಷಕರು ತಪ್ಪದೇ ಲಸಿಕೆ ಹಾಕಿಸುವ ಮೂಲಕ ಅವರ ಭವಿಷ್ಯದ ಆರೋಗ್ಯಕ್ಕೆ ಭದ್ರತೆ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣ ನಾಯಕ್ ಕರೆ ನೀಡಿದರು.
ಚಿತ್ರದುರ್ಗ ತಾಲ್ಲೂಕಿನ ಡಿ. ಮದಕರಿಪುರ ಗ್ರಾಮಕ್ಕೆ ಗುರುವಾರ ಜಿಲ್ಲಾ ಮಟ್ಟದ ಐಇಸಿ ತಂಡ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಲಸಿಕೆ ಪಡೆಯಲು ನಿರಾಕರಿಸುತ್ತಿದ್ದ ಪೋಷಕರ ಮನವೊಲಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ಲಸಿಕೆಯು ಹೊಸದೇನಲ್ಲ, ಜಗತ್ತಿನಾದ್ಯಂತ ಈಗಾಗಲೇ 50 ಕೋಟಿಗೂ ಅಧಿಕ ಲಸಿಕೆಗಳನ್ನು ನೀಡಲಾಗಿದೆ. ಕಳೆದ 15 ವರ್ಷಗಳ ಅಂಕಿ-ಅಂಶಗಳು ಈ ಲಸಿಕೆ ಸುರಕ್ಷಿತ ಮತ್ತು ಪರಿಣಾಮಕಾರಿ ಎಂಬುದನ್ನು ಸಾಬೀತುಪಡಿಸಿವೆ. ಸರ್ಕಾರದ ಮಾರ್ಗಸೂಚಿಯಂತೆ 14 ವರ್ಷ ಪೂರೈಸಿದ ಮತ್ತು 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಉಚಿತವಾಗಿ ಲಸಿಕೆ ನೀಡಲಾಗುತ್ತಿದ್ದು, ಪೋಷಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಜಾನಕಿ ಮಾತನಾಡಿ, ಹ್ಯೂಮನ್ ಪ್ಯಾಪಿಲೋಮ ವೈರಸ್ ಜನನಾಂಗದ ಸೋಂಕುಗಳಿಗೆ ಕಾರಣವಾಗುವ ಸಾಮಾನ್ಯ ವೈರಸ್ ಆಗಿದೆ. ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಗರ್ಭಕಂಠದ ಕ್ಯಾನ್ಸರ್ಗೆ ಹೆಚ್ಚಾಗಿ ಈ ವೈರಸ್ ಕಾರಣವಾಗಿರುತ್ತದೆ. ಲಸಿಕೆ ಹಾಕಿಸುವುದರಿಂದ ಈ ಭೀಕರ ಕಾಯಿಲೆಯನ್ನು ಆರಂಭದಲ್ಲೇ ತಡೆಗಟ್ಟಬಹುದು ಎಂದರು.
ಗ್ರಾಮದಲ್ಲಿ ಲಸಿಕೆ ಹಾಕಿಸಲು ನಿರಾಕರಿಸಿದ್ದ ಕುಟುಂಬಗಳ ಮನೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಹಿರೇಗುಂಟನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಭೇಟಿ ನೀಡಿ ವಿಶೇಷ ಜಾಗೃತಿ ಮೂಡಿಸಿದರು. ಮಕ್ಕಳ ಆರೋಗ್ಯ ಕಾಪಾಡುವುದು ಪೋಷಕರ ಪ್ರಥಮ ಜವಾಬ್ದಾರಿಯಾಗಿದೆ ಎಂದು ಮನವರಿಕೆ ಮಾಡಿಕೊಡಲಾಯಿತು.
ಕಾರ್ಯಕ್ರಮದಲ್ಲಿ ಹಿರಿಯ ಆರೋಗ್ಯ ಸುರಕ್ಷತಾ ಅಧಿಕಾರಿ ಶಾಂತಮ್ಮ, ಸಮುದಾಯ ಆರೋಗ್ಯ ಅಧಿಕಾರಿ ಪುನೀತ್, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಈರಮ್ಮ, ಆಶಾ ಕಾರ್ಯಕರ್ತೆ ಸುಭದ್ರ ಹಾಗೂ ಅಂಗನವಾಡಿ ಕಾರ್ಯಕರ್ತೆಯರಾದ ವಿಜಯಮ್ಮ ಮತ್ತು ಗೀತಮ್ಮ ಉಪಸ್ಥಿತರಿದ್ದರು.
