ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆತುರದಲ್ಲೂ ಇಲ್ಲ, ಆತಂಕದಲ್ಲೂ ಇಲ್ಲ ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ ಸುರೇಶ್ ಸ್ಪಷ್ಟಪಡಿಸಿದರು.ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಜಗಳವಿಲ್ಲ. ಕಾಂಗ್ರೆಸ್ ಪಕ್ಷದ ವರಿಷ್ಠರು, ಮುಖ್ಯಮಂತ್ರಿಗಳು, ಅಧ್ಯಕ್ಷರು ಹಾಗೂ ಡಿಸಿಎಂ ಆಗಿರುವ ಡಿ.ಕೆ. ಶಿವಕುಮಾರ್ ಕೂಡ ಈಗಾಗಲೇ ಈ ವಿಚಾರವಾಗಿ ಸ್ಪಷ್ಟನೆ ನೀಡಿದ್ದು, ಸಿದ್ದರಾಮಯ್ಯ ಅವರು ನಾಯಕತ್ವದಲ್ಲಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ. ಆದರೂ ಮಾಧ್ಯಮಗಳಿಗೆ ಯಾಕೆ ಗೊಂದಲವಿದೆ ಎಂದು ಗೊತ್ತಿಲ್ಲ. ಶಿವಕುಮಾರ್ ಅವರು ಪಕ್ಷ ಕೊಟ್ಟಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಪಕ್ಷದ ಕಾರ್ಯಕರ್ತನಾಗಿ ಮುನ್ನಡೆಸುತ್ತಿದ್ದಾರೆ. ಪಕ್ಷದ ಸೂಚನೆಯಂತೆ ಅವರು ಕೆಲಸ ಮಾಡುತ್ತಿದ್ದಾರೆ. ಇದರ ಹೊರತಾಗಿ ಹೆಚ್ಚಿನ ವಿಚಾರ ಏನೂ ಇಲ್ಲ. ಸಧ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಪದೇ ಪದೆ ಈ ವಿಚಾರ ಯಾಕೆ ಚರ್ಚೆಯಾಗುತ್ತಿದೆ ಗೊತ್ತಿಲ್ಲ ಎಂದರು.
ಇದೇ ನನ್ನ ಕೊನೆ ಚುನಾವಣೆ ಎಂದಿದ್ದ ಸಿದ್ದರಾಮಯ್ಯ ಅವರು ಈಗ 2028ಕ್ಕೂ ನನ್ನದೇ ನೇತೃತ್ವದಲ್ಲಿ ಚುನಾವಣೆ ಎಂದು ಹೇಳಿರುವ ಬಗ್ಗೆ ಕೇಳಿದಾಗ, ಸಿದ್ದರಾಮಯ್ಯ ಅವರು ಹಿರಿಯ ನಾಯಕರು. ರಾಜಕೀಯದಲ್ಲಿ ನಿವೃತ್ತಿ ಇಲ್ಲ. ರಾಜಕೀಯ ಇಚ್ಛಾಶಕ್ತಿ ಇರಬೇಕು. ಮುಖ್ಯಮಂತ್ರಿಗಳಿಗೆ ಇಚ್ಛಾಶಕ್ತಿ ಇದೆ. ಹೀಗಾಗಿ ಅವರು ಕೆಲವು ವಿಚಾರವನ್ನು ನಿಮ್ಮ ಜೊತೆ ಹಂಚಿಕೊಂಡಿರಬಹುದು ಎಂದು ತಿಳಿಸಿದರು.
ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದ ಮೇಲೆ ಸಿಎಂ ಪದೇ ಪದೆ ನಾನೇ ಸಿಎಂ ಎಂದು ಹೇಳುವ ಅಗತ್ಯವಿದೆ ಎಂದು ಕೇಳಿದಾಗ, ಈ ವಿಚಾರವಾಗಿ ಮಾತನಾಡಲು ನಾನು ಬಹಳ ಸಣ್ಣವನು ಎಂದರು.ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತಡಿ.ಕೆ. ಶಿವಕುಮಾರ್ ಅವರಿಗೆ ಹೆಚ್ಚಿನ ಶಾಸಕರ ಬೆಂಬಲ ಇಲ್ಲ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಶಾಸಕರ ಬೆಂಬಲ ಕೇಳುವ ಸಮಯವಲ್ಲ. ಸಿದ್ದರಾಮಯ್ಯ ಅವರು 2 ವರ್ಷಗಳಿಂದ ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಅವರು ಮುಂದುವರಿಯುತ್ತಿರುವಾಗ ಈ ವಿಚಾರ ಚರ್ಚೆಯಾಗುತ್ತಿರುವ ಬಗ್ಗೆ ನಮಗೆ ಗೊತ್ತಿಲ್ಲ. ನೀವು ಈ ವಿಚಾರ ಚರ್ಚೆ ಮಾಡುತ್ತಿರುವವರನ್ನೇ ಕೇಳಿ. ಶಿವಕುಮಾರ್ ಅವರದ್ದು ಬಲಾಬಲ ಪ್ರದರ್ಶನ ಮಾಡುವ ವ್ಯಕ್ತಿತ್ವವಿಲ್ಲ.
ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ.
ಕಾಂಗ್ರೆಸ್ ವರಿಷ್ಠರಿಗೆ ಗೌರವ ನೀಡುವ ವ್ಯಕ್ತಿತ್ವ ಹೊಂದಿರುವವರು. ಅವರು ಬೇರೆಯವರಿಗೆ ಮಾರ್ಗದರ್ಶಕರಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.ಪ್ರತಿಯೊಬ್ಬರಿಗೂ ಒಬ್ಬೊಬ್ಬರು ಸಿಎಂ ಆಗಲಿ ಎಂದು ಆಸೆ ಪಡುತ್ತಾರೆ. ಪ್ರತಿ ಜಿಲ್ಲೆ, ಸಮುದಾಯದವರು ನಮ್ಮವರು ಸಿಎಂ ಆಗಲಿ ಎಂದು ಆಶಯ ವ್ಯಕ್ತಪಡಿಸುವುದು ಸಹಜ. ಇದು ಇಂದು ನಡೆದಿರುವ ವಿಚಾರವಲ್ಲ. ಪ್ರತಿ ಅವಧಿಯಲ್ಲೂ ಇಂತಹ ಬೆಳವಣಿಗೆ ನಡೆದುಕೊಂಡು ಬಂದಿದೆ. ಇಂತಹ ಅಭಿಪ್ರಾಯವನ್ನು ತಪ್ಪು ಎಂದು ಹೇಳಲು ಆಗುವುದಿಲ್ಲ” ಎಂದರು.
ಎರಡು ಬಾರಿ ಇಡಿ ವಿಚಾರಣೆ ವಿಚಾರವಾಗಿ ಮಾತನಾಡಿ ನನಗೆ ಕಾರಣ ಗೊತ್ತಿಲ್ಲ. ಆದರೆ ನನಗೆ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ಮತ್ತೆ ವಿಚಾರಣೆಗೆ ಕರೆದಾಗ ಬರಬೇಕು ಎಂದು ತಿಳಿಸಿದ್ದಾರೆ. ಜವಾಬ್ದಾರಿಯುತ ಪ್ರಜೆಯಾಗಿ ವಿಚಾರಣೆಗೆ ಸಹಕಾರ ನೀಡಲು ಸಿದ್ಧನಿದ್ದೇನೆ ಎಂದು ತಿಳಿಸಿದರು.
ತಾವೇ ಹಾಕಿಕೊಂಡ ಲಕ್ಷ್ಮಣ ರೇಖೆ ಹೇಗೆ ದಾಟುತ್ತಾರೆ?
75 ವರ್ಷಕ್ಕೆ ನಿವೃತ್ತಿ ಪಡೆಯಬೇಕು ಎಂದು ಆರ್ ಎಸ್ಎಸ್ ಮುಖಂಡ ಮೋಹನ್ ಭಾಗವತ್ ಹೇಳಿಕೆ ಬಗ್ಗೆ ಕೇಳಿದಾಗ, ರಾಜಕಾರಣದಲ್ಲಿ ನಿವೃತ್ತಿ ಇಲ್ಲ ಎಂದು ನಾನು ಹೇಳಿದ್ದೇನೆ. ರಾಜಕೀಯ ಇಚ್ಛಾಶಕ್ತಿ ಜೊತೆಗೆ ಅವರವರು ಹಾಕಿಕೊಂಡಿರುವ ಲಕ್ಷ್ಮಣ ರೇಖೆಗಳನ್ನು ದಾಟುವುದು ಹೇಗೆ ಎಂಬುದು ಮುಖ್ಯ. ಯಾವಾಗಲೂ ಇನ್ನೊಬ್ಬರಿಗೆ ಮಾರ್ಗದರ್ಶಕರಾಗಿ ಮಾದರಿಯಾಗಿರಬೇಕು. ಈ ರೀತಿ ದಿಟ್ಟ ಹೆಜ್ಜೆ ಇಟ್ಟಾಗ ಅವರ ಹೆಸರು ಶಾಶ್ವತವಾಗಿ ಉಳಿಯುತ್ತದೆ ಎಂದು ತಿಳಿಸಿದರು
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



