ಚಿತ್ರದುರ್ಗ: ನವಜಾತ ಶಿಶುಗಳ ಜನನದ ನಂತರದ ಕಠಿಣ ಸಂದರ್ಭಗಳಿಂದ ಹಿಡಿದು, ಆರಂಭದ ಸಾವಿರ ದಿನಗಳು ಮಗುವಿನ ಭೌತಿಕ ಹಾಗೂ ಬೌದ್ಧಿಕ ಬೆಳವಣಿಗೆಯನ್ನು ವೃದ್ಧಿಸಲು ಉತ್ತಮ ಸಮಯವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ‘ಸ್ಪರ್ಶ್-ದಿ ಫಸ್ಟ್-1000 ಡೇಸ್ ಆಫ್ ಲೈಫ್’ ಎನ್ನುವ ಸಂಶೋಧನಾ ಯೋಜನೆಗೆ ಐದು ತಿಂಗಳ ಹಿಂದೆಯೇ ಚಾಲನೆ ನೀಡಲಾಗಿದ್ದು, ಜಿಲ್ಲೆಯ ಮಾದರಿ ಅಧ್ಯಯನ ನಡೆಸಲಾಗುತ್ತಿದೆ ಎಂದು ನವದೆಹಲಿಯ ಐಸಿಎಂಆರ್ ಹೆರಿಗೆ ವಿಭಾಗದ ಮುಖ್ಯಸ್ಥೆ ಡಾ.ಅಶೂ ಗ್ರೋವರ್ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಇಲಾಖೆ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐ.ಸಿ.ಎಂ.ಆರ್), ಕರ್ನಾಟಕ ಆರೋಗ್ಯ ಸಂವರ್ಧನ ಟ್ರಸ್ಟ್ (ಕೆ.ಹೆಚ್.ಪಿ.ಟಿ), ಹಾಗೂ ಸೆಂಟ್ ಜಾನ್ಸ್ ಸಂಶೋಧನಾ ಸಂಸ್ಥೆ (ಎಸ್.ಜೆ.ಆರ್.ಐ) ವತಿಯಿಂದ ಆಯೋಜಿಸಲಾದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಐಸಿಎಂಆರ್ ಸಂಶೋಧನಾ ಕೇಂದ್ರದಿಂದ ‘ಸ್ಪರ್ಶ್-ದಿ ಫಸ್ಟ್-1000 ಡೇಸ್ ಆಫ್ ಲೈಫ್’ ಯೋಜನೆ ಅನುಷ್ಠಾನದ ಬಗ್ಗೆ ಕೂಲಂಕೂಷವಾಗಿ ಅಧ್ಯಯನ ನಡೆಸಲಾಗುತ್ತಿದೆ. ಮಗುವಿನ ಜನನದಿಂದ ಸಾವಿರ ದಿನಗಳವರೆಗೆ ಉತ್ತಮ ಆರೋಗ್ಯ ವೃದ್ಧಿಪಡಿಸಲು ಹಲವು ರೀತಿಯ ಕಾರ್ಯತಂತ್ರಗಳನ್ನು ರೂಪಿಸಲಾಗಿದೆ. ದೇಶದಾದ್ಯಂತ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಯೋಜನೆಯ ಅನುಷ್ಠಾನಕ್ಕೆ ತರಲು ರಾಜ್ಯ ಮಟ್ಟದ ಹಾಗೂ ಸ್ಥಳೀಯ ಆರೋಗ್ಯ ಸಂಸ್ಥೆಗಳ ಜೊತೆ ಕೈ ಜೋಡಿಸಲಾಗಿದೆ. ಆಯುಷ್ಮಾನ್ ಭಾರತ ಯೋಜನೆಯಡಿ ಜಿಲ್ಲಾ ಆಸ್ಪತ್ರೆಗಳು ಉತ್ತಮ ಸೌಲಭ್ಯಗಳನ್ನು ಜನರಿಗೆ ನೀಡುತ್ತಿವೆ. ನವದೆಹಲಿ ಅಥವಾ ಬೆಂಗಳೂರಿನಲ್ಲಿ ಕುಳಿತು ಯೋಜನೆಯನ್ನು ರೂಪಿಸಿ, ಸುಮ್ಮನೆ ಕುಳಿತರೆ ಯಶಸ್ವಿ ಅನುಷ್ಠಾನ ಮಾಡಲು ಸಾಧ್ಯವಿಲ್ಲ. ಜಿಲ್ಲಾ ಆಸ್ಪತ್ರೆಗಳು ವಾಸ್ತವಿಕವಾಗಿ ಎದುರಿಸುತ್ತಿರುವ ತೊಂದರೆ ಹಾಗೂ ಸವಾಲುಗಳ ಕುರಿತು ಮಾಹಿತಿ ನೀಡಬೇಕು. ಇದರಿಂದ ಅಗತ್ಯ ಯಂತ್ರೋಪಕರಣ, ಔಷಧೋಪಚಾರ ಹಾಗೂ ಸವಲತ್ತುಗಳನ್ನು ಉನ್ನತೀಕರಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಕಾರ್ಯಗಾರ ಆಯೋಜಿಸಲಾಗಿದೆ. ಸಹಜ ಹೆರಿಗೆ, ಅವಧಿಗೆ ಮುನ್ನ ಹೆರಿಗೆ, ಕಡಿಮೆ ತೂಕ ಮಕ್ಕಳ ಜನನವಾದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕಾರ್ಯವಿಧಾನಗಳ ಬಗ್ಗೆ ಮಾರ್ಗಸೂಚಿಗಳನ್ನು ರಚಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಮಾದರಿ ಅಧ್ಯಯನಲ್ಲಿ ಕಂಡುಬರುವ ಅಂಶಗಳನ್ನು ಪರಿಗಣಿಸಿ ಹೆಚ್ಚು ಪರಿಣಾಮ ಬೀರುವ ಕಾರ್ಯತಂತ್ರಗಳನ್ನು ಐಸಿಎಂಆರ್ ರೂಪಿಸಲಿದೆ. ಇದು ದೇಶದ ಬೇರೆ ಜಿಲ್ಲೆ ಹಾಗೂ ಭಾಗಗಳ ಸಮಸ್ಯೆಗಳಿಗೆ ಪರಿಹಾರ ದೊರಕಿಸಿ ಕೊಡಬಹುದು ಎಂದು ಡಾ.ಅಶೂ ಗ್ರೋವರ್ ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್ ಮಾತನಾಡಿ, ‘ಸ್ಪರ್ಶ್-ದಿ ಫಸ್ಟ್-1000 ಡೇಸ್ ಆಫ್ ಲೈಫ್’ ಯೋಜನೆಯನ್ನು ಜಿಲ್ಲೆಯಲ್ಲಿ ಜಾರಿ ಮಾಡಿ ಐದು ತಿಂಗಳಾಗಿದೆ. ಈ ಅವಧಿಯಲ್ಲಾದ ಉತ್ತಮ ಕಾರ್ಯಗಳು ಹಾಗೂ ಎದುರಿಸಿದ ಅಡಚಣೆಗಳು ಬಗ್ಗೆ ಅವಲೋಕನ ನಡೆಸಲು ಕಾರ್ಯಗಾರ ನೆರವಾಗಲಿದೆ. ಇದರಿಂದ ಮುಂದಿನ ದಿನಗಳಿಗೆ ಹೇಗೆ ಕಾರ್ಯತಂತ್ರಗಳನ್ನು ರೂಪಿಸಬಹುದು ಎಂಬುದು ತಿಳಿದು ಬರಲಿದೆ ಎಂದರು.
ಯೋಜನೆಯಡಿ ಕಡಿಮೆ ತೂಕದೊಂದಿಗೆ ಜನಿಸಿದ ಮಗುವಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡಿ ಆರೋಗ್ಯ ಸುಧಾರಿಸುವಂತೆ ಮಾಡಲಾಗಿದೆ. ಈ ಕುರಿತು ಮಗುವಿನ ತಾಯಿ ಪ್ರಶಾಂತನಗರದ ಚಂದನ ತನ್ನ ಅನಿಸಿಕೆಗಳನ್ನು ತಿಳಿಸಿದರು.ಕಾರ್ಯಾಗಾರದಲ್ಲಿ ನವಜಾತ ಹಾಗೂ 2 ವರ್ಷದ ಒಳಗಿನ ಮಕ್ಕಳ ಚಿಕಿತ್ಸಾ ವಿಧಾನ ಕುರಿತು ವೈದ್ಯರಿಗೆ ತರಬೇತಿ ನೀಡಲಾಯಿತು. ಐಸಿಎಂಆರ್ನ ಡಾ.ಆಮ್ಲಿನ್ ಶುಕ್ಲಾ, ಕೆ.ಹೆಚ್.ಟಿ.ಪಿ ಯೋಜನಾ ಮುಖ್ಯಸ್ಥೆ ಡಾ.ಪ್ರಾರ್ಥನಾ, ಹಿರಿಯ ವ್ಯವಸ್ಥಾಪಕಿ ಡಾ.ಆಯಿಷಾ, ಜಿಲ್ಲಾ ಆರ್ಸಿಹೆಚ್ಓ ಡಾ.ಅಭಿನವ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ವಿಜಯ್ಕುಮಾರ್, ಸೆಂಟ್ ಜಾನ್ಸ್ ಸಂಶೋಧನಾ ಸಂಸ್ಥೆಯ ಡಾ.ಪ್ರೇಮ್ ಮೌನಿ, ಡಾ.ಸುಮನ್ ರಾವ್, ಜಿಲ್ಲಾ ಸಂಯೋಜಕಿ ಬಿ.ವೀಣಾ, ತಾಲ್ಲೂಕು ಸಂಯೋಜಕಿ ಮೇಘಾ ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



