ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ವೇಗ
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಸರ್ಕಾರ ಅಗತ್ಯ ಸಹಕಾರ ನೀಡಿದ್ದು, ಕಾಮಗಾರಿಗಳಿಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆಯಿದೆ ಎಂದು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಜಿ.ಕಿರಣ್ ಕುಮಾರ್ ಹೇಳಿದರು.
ಭದ್ರಾ ಮೇಲ್ದಂಡೆ ಯೋಜನೆಯ ಬುರುಜನರೊಪ್ಪ ಉಪವಿಭಾಗ ಕಚೇರಿಗೆ ಸಹಾಯಕ ಕಾರ್ಯಪಾಲಕ ಎಂಜಿಯರ್ ಆಗಿ ಬಡ್ತಿ ಹೊಂದಿರುವ ಜಿ.ಕಿರಣ್ ಕುಮಾರ್ ಪದಗ್ರಹಣ ಸ್ವೀಕರಿಸಿ ಮಾತನಾಡಿದರು.
ಮೈಸೂರು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ನಲ್ಲಿ ಎರಡು ಬಂಗಾರ ಪದಕಗಳೊಂದಿಗೆ ಸಿವಿಲ್ ಎಂಜಿನಿಯರಿಂಗ್ ಪದವಿ ಪಡೆದಿರುವ ಕಿರಣ್ ಕುಮಾರ್.ಜಿ ಆಲಮಟ್ಟಿ ನೀರಾವರಿ ಯೋಜನೆಯಲ್ಲಿ ಐದು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಭದ್ರಾ ಮೇಲ್ಡಂಡೆ ಯೋಜನೆಯಲ್ಲಿ ಏಳು ವರ್ಷಗಳ ಕೆಲಸದ ಅನುಭವ ಹೊಂದಿರುತ್ತಾರೆ. ದಕ್ಷತೆ ಮತ್ತು ಪ್ರಾಮಾಣಿಕತೆಗೆ ಹೆಸರು ವಾಸಿಯಾಗಿದ್ದಾರೆ.
ಜಿಲ್ಲೆಯ ರೈತರಿಗೆ ಅತ್ಯಂತ ಪ್ರಮುಖವಾದ ಭದ್ರ ಮೇಲ್ದಂಡೆ ಯೋಜನೆಯ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಇವರ ಅನುಭವ ಸಹಕಾರಿಯಾಗಲಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಭಾರತ ಸರ್ಕಾರದ ಕೇಂದ್ರ ಜಲಶಕ್ತಿ ಸಚಿವಾಲಯದ ತಾಂತ್ರಿಕ ಸಲಹಾ ಸಮಿತಿಯಿಂದ ಮಹತ್ವದ ಅನುಮೋದನೆ ದೊರೆತಿರುವುದು ಗಮನಾರ್ಹವಾಗಿದೆ.
ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಶುಭಾಶಯ ಕೋರಿ, ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಬಾಕಿ ಇರುವ ಕಾಮಗಾರಿಗಳ ಪ್ರಗತಿ ಹಾಗೂ ಅವುಗಳಿಗೆ ಇನ್ನಷ್ಟು ವೇಗ ನೀಡುವ ಕ್ರಮಗಳ ಕುರಿತು ವಿಸ್ತೃತವಾಗಿ ಚರ್ಚಿಸಿದರು. ಜೊತೆಗೆ, ಬರಪೀಡಿತ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
