ಚಿತ್ರದುರ್ಗ: ರಾಜ್ಯದ ನೂತನ ಸಚಿವ ಸಂಪುಟದಲ್ಲಿ ಹಿರಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಅವರಿಗೆ ಹೆಚ್ಚಿನ ಜವಾಬ್ದಾರಿ ಹಾಗೂ ಉನ್ನತ ಸ್ಥಾನಮಾನ ನೀಡಬೇಕಾಗಿತ್ತು ಎಂದು ಮಾದಿಗ ಸಮುದಾಯದ ಮುಖಂಡ ಯಶವಂತ್ ಒತ್ತಾಯಿಸಿದ್ದಾರೆ.
ಕೆ.ಎಚ್.ಮುನಿಯಪ್ಪ ಅವರಿಗೆ ಹಿಂದಿನ ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯನ್ನೇ ಮುಂದುವರಿಸಿರುವುದು ಸಮುದಾಯದ ನಿರೀಕ್ಷೆಗೆ ತಕ್ಕಂತಿಲ್ಲ. ಅವರ ದೀರ್ಘ ರಾಜಕೀಯ ಅನುಭವ, ಪಕ್ಷಕ್ಕೆ ನೀಡಿರುವ ಕೊಡುಗೆ ಹಾಗೂ ಹಿರಿತನವನ್ನು ಪರಿಗಣಿಸಿ ಸಮಾಜ ಕಲ್ಯಾಣ ಇಲಾಖೆ ಅಥವಾ ಗೃಹ ಇಲಾಖೆಯಂತಹ ಪ್ರಮುಖ ಖಾತೆ ನೀಡಬೇಕಾಗಿತ್ತು ಎಂದು ಹೇಳಿದ್ದಾರೆ.
ಕೆ.ಎಚ್.ಮುನಿಯಪ್ಪ ಅವರು ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಅಪಾರ ಅನುಭವ ಹೊಂದಿರುವ ನಾಯಕರು. ಕೇಂದ್ರ ಸರ್ಕಾರದಲ್ಲಿ ಆರು ಬಾರಿ ಸಂಸದರಾಗಿ, ರೈಲ್ವೆ ಸೇರಿದಂತೆ ಮಹತ್ವದ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿದ ಹೆಗ್ಗಳಿಕೆ ಅವರದು. ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಹಲವು ವರ್ಷಗಳಿಂದ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದಾರೆ.
ಮಾದಿಗ ಸಮುದಾಯದ ಪರವಾಗಿ ಕೆ.ಎಚ್.ಮುನಿಯಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ನಿರೀಕ್ಷೆ ಇತ್ತು. ಡಾ.ಜಿ.ಪರಮೇಶ್ವರ್ ಅವರನ್ನು ಉಪಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿರುವುದನ್ನು ಸ್ವಾಗತಿಸುತ್ತೇವೆ. ಆದರೆ ಕೆ.ಎಚ್.ಮುನಿಯಪ್ಪ ಅವರ ಹಿರಿತನ ಮತ್ತು ಅನುಭವವನ್ನು ಗಮನಿಸಿ ಅವರಿಗೆ ಇನ್ನೊಂದು ಉನ್ನತ ಸ್ಥಾನ ನೀಡಬಹುದಿತ್ತು.
ಮಾದಿಗ ಸಮುದಾಯದ ಹಿರಿಯ ನಾಯಕನಾಗಿರುವ ಕೆ.ಎಚ್.ಮುನಿಯಪ್ಪ ಅವರಿಗೆ ಸೂಕ್ತ ಗೌರವ ಮತ್ತು ಅಧಿಕಾರ ನೀಡುವುದು ಸಾಮಾಜಿಕ ನ್ಯಾಯದ ದೃಷ್ಟಿಯಿಂದಲೂ ಮಹತ್ವದ್ದಾಗಿದೆ. ಅವರಂತಹ ಅನುಭವಿಗಳ ಸೇವೆಯನ್ನು ಸರ್ಕಾರ ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಯಶವಂತ್ ಮನವಿ ಮಾಡಿದ್ದಾರೆ.
ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಅವರು ಕೆ.ಎಚ್.ಮುನಿಯಪ್ಪ ಅವರ ಅನುಭವ ಮತ್ತು ಹಿರಿತನಕ್ಕೆ ಹೆಚ್ಚಿನ ಆದ್ಯತೆ ನೀಡುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
