ಒಳ ಮೀಸಲಾತಿ ಜಾರಿಗೆ ಸರ್ಕಾರ ಬದ್ಧ: ನೇಮಕಾತಿಯಲ್ಲೇ ಅನುಷ್ಠಾನ – ಮುನಿಯಪ್ಪ
ಚಿತ್ರದುರ್ಗ, ಮಾ.31: ರಾಜ್ಯ ಸರ್ಕಾರ ನೇಮಕಾತಿಗೆ ಮುಂದಾಗಿರುವ ಹುದ್ದೆಗಳಲ್ಲಿ ಒಳ ಮೀಸಲಾತಿಯನ್ನು ಅಳವಡಿಸಿಕೊಂಡೇ ಪ್ರಕ್ರಿಯೆ ನಡೆಸಲಾಗುವುದು ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದರು.
ನಗರದ ಶಿವ ಶರಣ ಮಾದಾರ ಚನ್ನಯ್ಯ ಗುರುಪೀಠದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ನಡೆಯುತ್ತಿರುವ ನೇಮಕಾತಿ ಪ್ರಕ್ರಿಯೆ ಅಂತಿಮಗೊಳ್ಳುವೊಳಗೆ ಒಳ ಮೀಸಲಾತಿ ಜಾರಿಯಾಗಲಿದ್ದು, ಅದರಂತೆಯೇ ಎಲ್ಲ ಸಮುದಾಯಗಳ ನಿರುದ್ಯೋಗಿ ಅಭ್ಯರ್ಥಿಗಳಿಗೆ ನ್ಯಾಯ ದೊರೆಯಲಿದೆ. ಈ ಕುರಿತು ಯಾವುದೇ ಆತಂಕ ಬೇಡ ಎಂದು ಭರವಸೆ ನೀಡಿದರು.
ಹಿಂದಿನ ಬಿಜೆಪಿ ಸರ್ಕಾರ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಏರಿಸಿದ್ದರೂ, ನ್ಯಾಯಾಲಯದ ನಿರ್ದೇಶನದಂತೆ ಅದನ್ನು ಶೇ.50ರೊಳಗೆ ತರಬೇಕಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಸಮುದಾಯಗಳ ಮುಖಂಡರೊಂದಿಗೆ ಚರ್ಚಿಸಿ, ಸ್ವಲ್ಪ ಪ್ರಮಾಣದಲ್ಲಿ ಕಡಿತಗೊಳಿಸಿ ಜಾರಿಗೆ ತರಲು ಒಪ್ಪಿಗೆ ವ್ಯಕ್ತವಾಗಿದೆ. ಅಂತಿಮ ತೀರ್ಮಾನವನ್ನು ಸಚಿವ ಸಂಪುಟದಲ್ಲಿ ಕೈಗೊಂಡು, ಉಪಚುನಾವಣೆಯ ಬಳಿಕ ಜಾರಿ ಮಾಡಲಾಗುವುದು ಎಂದರು.
ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕುರಿತು ಕಳೆದ 35 ವರ್ಷಗಳಿಂದ ಹೋರಾಟ ನಡೆಯುತ್ತಿದ್ದು, ಈ ಸಂಬಂಧ ಹಲವು ಆಯೋಗಗಳು ವರದಿ ಸಲ್ಲಿಸಿವೆ. ಸಚಿವ ಸಂಪುಟದಲ್ಲೂ ಹಲವು ಬಾರಿ ಚರ್ಚೆ ನಡೆದಿದ್ದು, ಮಾರ್ಚ್ 27ರಂದು ವಿಶೇಷ ಅಧಿವೇಶನದಲ್ಲಿ ಜಾರಿಗೆ ತರುವ ಯತ್ನ ನಡೆದರೂ, ಉಪಚುನಾವಣೆ ನೀತಿ ಸಂಹಿತೆಯ ಹಿನ್ನೆಲೆ ಮುಂದೂಡಲಾಗಿದೆ ಎಂದು ವಿವರಿಸಿದರು.
ಉಪಚುನಾವಣೆ ನೀತಿ ಸಂಹಿತೆ ಮುಗಿದ ಬಳಿಕ ಒಳ ಮೀಸಲಾತಿ ಜಾರಿಯಾಗಲಿದೆ. ನೆರೆ ರಾಜ್ಯಗಳ ಮಾದರಿಯಲ್ಲಿ ಕರ್ನಾಟಕದಲ್ಲೂ ಜಾರಿ ಮಾಡಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಪೆಟ್ರೋಲ್ ಮತ್ತು ಗ್ಯಾಸ್ ಕೊರತೆ ಇಲ್ಲ. ಸರಿಯಾದ ವಿತರಣೆ ನಡೆಯುತ್ತಿದ್ದು, ಕಾಳಸಂತೆ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಕೇಂದ್ರ ಸರ್ಕಾರದಿಂದ ಹೆಚ್ಚಿನ ಪೂರೈಕೆಗೆ ಮನವಿ ಮಾಡಲಾಗಿದೆ ಎಂದರು.
ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ದಾವಣಗೆರೆ ಮತ್ತು ಬಾಗಲಕೋಟೆ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಜನರ ಬೆಂಬಲ ದೊರೆಯಲಿದೆ ಎಂದರು.
ಗೋಷ್ಠಿಯಲ್ಲಿ ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ಡಿಸಿಸಿ ಕಾರ್ಯಾಧ್ಯಕ್ಷ ಹಾಲಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
