ವಿದ್ಯಾರ್ಥಿಗಳ ಕೈಗೆ ಮೊಬೈಲ್; ನಿಷೇಧವೋ..ನಿರ್ಬಂಧವೋ ?
ಬೆಂಗಳೂರು: 16 ವರ್ಷದೊಳಗಿನ ಎಲ್ಲಾ ಶಾಲಾ-ಕಾಲೇಜುಗಳ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧಿಸಬೇಕೋ ಅಥವಾ ನಿರ್ಬಂಧಿಸಬೇಕೋ ಎಂಬುದರ ಕುರಿತು ಪೋಷಕರು ಸೇರಿದಂತೆ ಎಲ್ಲರೊಂದಿಗೆ ಚರ್ಚಿಸಿ ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಮಂಡಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಕ್ಕಳಿಗೆ ಮೊಬೈಲ್ ಕೊಡದಿದ್ದರೆ ಆತ್ಮಹತ್ಯೆ ಹಾದಿ ತುಳಿಯುತ್ತಿದ್ದಾರೆ. ಮೊಬೈಲ್ ಚಟವು ರೋಗವಾಗಿ ಪರಿವರ್ತನೆಯಾಗುತ್ತಿದೆ. ಸರ್ಕಾರವು ಇದಕ್ಕೆ ನಿಯಂತ್ರಣ ಹೇರಬೇಕು ಎಂದರು.
ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕವು 16 ವರ್ಷದ ಎಲ್ಲಾ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಿ ಮೊಬೈಲ್ ಬಳಕೆ ನಿಯಂತ್ರಣ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ ಮಾಹಿತಿ ತಂತ್ರಜ್ಞಾನ ಇಲಾಖೆಯು ಸಮಿತಿ ರಚಿಸಲಾಗಿದ್ದು, ಅವರಿಂದ ನೆರವು ಪಡೆಯಲಾಗುತ್ತಿದೆ. ಸಂಪೂರ್ಣವಾಗಿ ಮೊಬೈಲ್ ಬಳಕೆ ನಿಷೇಧಿಸಬೇಕೋ ಅಥವಾ ನಿರ್ಬಂಧಿಸಬೇಕೋ ಎಂಬುದರ ಬಗ್ಗೆ ಎಲ್ಲರೊಂದಿಗೆ ಕೂಲಂಕಷವಾಗಿ ಚರ್ಚಿಸಿ ಮುಂದಿನ ಅಧಿವೇಶನದ ವೇಳೆಗೆ ಸೂಕ್ತ ನಿರ್ಧಾರಕ್ಕೆ ಬರಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಕೆಲ ದೇಶಗಳಲ್ಲಿ ಶಾಲೆಗಳಲ್ಲಿ ಮೊಬೈಲ್ ಬಳಕೆ ಸಂಪೂರ್ಣ ನಿಷೇಧಿಸಲು ಹೊರಟಿವೆ. 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ 2007ರಲ್ಲಿ ಮೊಬೈಲ್ ಬಳಕೆ ನಿಷೇಧ ಕುರಿತು ಕಾಯ್ದೆ ರೂಪಿಸಲಾಗಿತ್ತು. ಆದರೆ ಸಮಗ್ರವಾಗಿ ಕಾರ್ಯಗತಗೊಳಿಸಲು ಸಾಧ್ಯವಾಗಿರಲಿಲ್ಲ. ಮೊಬೈಲ್ ಬಳಕೆ ನಿಷೇಧ ಕುರಿತು ಅನ್ಯ ರಾಷ್ಟ್ರಗಳ ಮಕ್ಕಳ ಆಯೋಗಗಳ ರೂಪಿಸಿರುವ ಮಾರ್ಗಸೂಚಿಗಳ ಬಗ್ಗೆ ಅಧ್ಯಯನ ಮಾಡಲಾಗುವುದು. ಪೋಷಕರೊಂದಿಗೆ ಈ ಬಗ್ಗೆ ಚರ್ಚಿಸಿದ ಬಳಿಕ ಮೊಬೈಲ್ ನಿಷೇಧ ಅಥವಾ ನಿರ್ಬಂಧಿಸಬೇಕಾ ಎಂಬುದರ ತೀರ್ಮಾನಿಸಲಾಗುವುದು ಎಂದು ಹೇಳಿದರು.
