ಬೆಂಗಳೂರು, ಜುಲೈ 3, 2025: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಎಂಎಲ್ಸಿ ಎನ್.ರವಿ ಕುಮಾರ್ ನೀಡಿರುವ ಅವಹೇಳನಕಾರ ಹೇಳಿಕೆಯನ್ನು ಕರ್ನಾಟಕದ ಐಎಎಸ್ ಅಧಿಕಾರಿಗಳ ಸಂಘ ಬಲವಾಗಿ ಖಂಡಿಸಿದ್ದು, ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರುವಾರ ಭೇಟಿ ಮಾಡಿದ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ಪಂಕಜ್ ಕುಮಾರ್ ಪಾಂಡೆ,ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾದ ಖುಷ್ಬೂ ಗೋಯಲ್ ಚೌಧರಿ ಅವರನ್ನೊಳಗೊಂಡ ನಿಯೋಗವು ಸಂಘದ ಪರವಾಗಿ ಮನವಿ ಸಲ್ಲಿಸಿ, ರವಿ ಕುಮಾರ್ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತು.
ಕುರಿತ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಘವು, ಯಾರದೇ ಭಯ, ಅವಮಾನ ಅಥವಾ ರಾಜಕೀಯ ಬೆದರಿಕೆ ಇಲ್ಲದೆ ಸರ್ಕಾರಿ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸಲು ಅವಕಾಶ ಇರಬೇಕು. ಇದಕ್ಕೆ ಚ್ಯುತಿ ಉಂಟುಮಾಡುವವರ ವಿರುದ್ಧ ಸರ್ಕಾರವು ತ್ವರಿತ ಮತ್ತು ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಹೇಳಿದೆ.
ಮುಖ್ಯ ಕಾರ್ಯದರ್ಶಿಗಳು ರಾಜ್ಯದ ಅತ್ಯುನ್ನತ ನಾಗರಿಕ ಹುದ್ದೆಯನ್ನು ಹೊಂದಿರುತ್ತಾರೆ. ಸಮಗ್ರತೆ, ಸಮರ್ಪಣೆ ಮತ್ತು ವಿಶಿಷ್ಟ ಸಾರ್ವಜನಿಕ ಸೇವೆಗಾಗಿ ಅವರನ್ನು ಗೌರವಿಸಲಾಗುತ್ತದೆ. ಇವರ ವಿರುದ್ಧ ರವಿ ಕುಮಾರ್ ಅವರು ಸಾರ್ವಜನಿಕ ವೇದಿಕೆಯಲ್ಲಿ ಅಸಭ್ಯ ಮತ್ತು ಮಾನಹಾನಿಕರ ಹೇಳಿಕೆ ನೀಡಿ, ಹುದ್ದೆಯ ಘನತೆಗೆ ಧಕ್ಕೆ ತಂದಿದ್ದಾರೆ. ಇಂಥ ಆಕ್ಷೇಪಾರ್ಹ ಹೇಳಿಕೆಗಳು ನಾಗರಿಕ ಸೇವೆಯ ವಿಶ್ವಾಸಾರ್ಹತೆಯನ್ನು ಹಾಳುಮಾಡುತ್ತವೆ,’ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಈ ಹಿಂದೆಯೂ ರವಿ ಕುಮಾರ್ ಅವರು ಕಲಬುರಗಿಯ ಉಪ ಆಯುಕ್ತರ ವಿರುದ್ಧ ಆಧಾರರಹಿತ ಮತ್ತು ಕೋಮುವಾದಿ ಹೇಳಿಕೆ ನೀಡಿದ್ದರು. ಈ ಬಗ್ಗೆಯೂ ಸಂಘ ಆಕ್ಷೇಪ ವ್ಯಕ್ತಪಡಿಸಿ, ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿತ್ತು. ಆದರೂ, ರವಿ ಕುಮಾರ್ ತಮ್ಮ ವರ್ತನೆಯನ್ನು ತಿದ್ದಿಕೊಳ್ಳದೇ, ಅಧಿಕಾರಿಗಳ ವಿರುದ್ಧ ದೂಷಣೆ ಮುಂದುವರಿಸಿರುವುದು ತೀವ್ರ ಕಳವಳಕಾರಿ ಮತ್ತು ಸ್ವೀಕಾರಾರ್ಹವಲ್ಲ ಎಂದಿದೆ.
ಸಂಘವು ರವಿ ಕುಮಾರ್ ವಿರುದ್ಧ ಈ ಕ್ರಮಗಳಿಗೆ ಆಗ್ರಹಿಸಿದೆ
1. ಎನ್. ರವಿ ಕುಮಾರ್ ಅವರಿಂದ ಸಾರ್ವಜನಿಕವಾಗಿ ಮತ್ತು ಬೇಷರತ್ ಕ್ಷಮೆಯಾಚಿಸಬೇಕು.
2. ಅನ್ವಯವಾಗುವ ಕಾನೂನುಗಳ ಅಡಿಯಲ್ಲಿ ಅವರ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು.
3. ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಅವರ ಹೇಳಿಕೆ ಖಂಡಿಸಿ, ನಿರ್ಣಯ ಕೈಗೊಳ್ಳಬೇಕು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



