ಸ್ವಯಂ ಗಣತಿಯಲ್ಲಿ ಕಾಣದ ಪ್ರಗತಿ; ಶೇ. 100 ರಷ್ಟು ಸಾಧನೆಗೆ ಎಡಿಸಿ ಬಿ.ಟಿ.ಕುಮಾರಸ್ವಾಮಿ ಸೂಚನೆ
ಚಿತ್ರದುರ್ಗ: ಭಾರತದ ಜನಗಣತಿ-2027ರ ಅಂಗವಾಗಿ ಜಿಲ್ಲೆಯಲ್ಲಿ ‘ಸ್ವಯಂ ಗಣತಿ’ ಪ್ರಕ್ರಿಯೆಯನ್ನು ಚುರುಕುಗೊಳಿಸುವ ಮೂಲಕ ಸ್ವಯಂ ಗಣತಿ ಕಾರ್ಯವನ್ನು ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ಜಿಲ್ಲೆಯಲ್ಲಿ ಸ್ವಯಂ ಗಣತಿ ಕಾರ್ಯ ಕೈಗೊಳ್ಳುವ ಸಂಬಂಧ ವಿವಿಧ ಇಲಾಖಾ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನಗಣತಿಯ ಮೊದಲ ಹಂತವಾದ ಮನೆ ಪಟ್ಟಿ ತಯಾರಿಕೆ ಈಗಾಗಲೇ ಆರಂಭವಾಗಿದ್ದು, ಸಾರ್ವಜನಿಕರು ತಾವಾಗಿಯೇ ಮಾಹಿತಿ ನೀಡುವ ‘ಸ್ವಯಂ ಗಣತಿ’ ಕಾರ್ಯವನ್ನು ಜಿಲ್ಲೆಯಲ್ಲಿ ಚುರುಕುಗೊಳಿಸಬೇಕು ಎಂದು ತಿಳಿಸಿದ ಅವರು, ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳ ಮುಖ್ಯಸ್ಥರು, ಅಧಿಕಾರಿಗಳು ಹಾಗೂ ಗ್ರೂಪ್ ‘ಡಿ’ ವರೆಗಿನ ಎಲ್ಲಾ ಸಿಬ್ಬಂದಿಗಳು ಮೊದಲು ತಮ್ಮ ಸ್ವಯಂ ಗಣತಿಯನ್ನು ಪೂರ್ಣಗೊಳಿಸಬೇಕು. ಇಲಾಖಾ ಮುಖ್ಯಸ್ಥರು ತಮ್ಮ ಕಚೇರಿಯ ಶೇ.100 ರಷ್ಟು ಸ್ವಯಂ ಗಣತಿ ಈ ಕಾರ್ಯ ಮುಗಿಸಿರುವ ಬಗ್ಗೆ ಅಕ್ನಾಲೆಡ್ಜ್ಮೆಂಟ್ ಸಂಖ್ಯೆಗಳ ಪಟ್ಟಿಯನ್ನು ಮುಂಬರುವ ಸೋಮವಾರದೊಳಗೆ ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ಶಾಖೆಗೆ ಸಲ್ಲಿಸಬೇಕು ಎಂದು ನಿರ್ದೇಶಿಸಿದರು.
ನೆರೆಯ ಜಿಲ್ಲೆಗಳಲ್ಲಿ ಸ್ವಯಂ ಗಣತಿ ಪ್ರಕ್ರಿಯೆ ಶೇ. 4 ರಿಂದ 5 ರಷ್ಟು ಪ್ರಗತಿ ಸಾಧಿಸಿದ್ದರೆ, ಚಿತ್ರದುರ್ಗ ಜಿಲ್ಲೆಯಲ್ಲಿ ಕೇವಲ ಶೇ. 0.64 ರಷ್ಟು ಮಾತ್ರ ದಾಖಲಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರತಿಯೊಬ್ಬ ಸರ್ಕಾರಿ ಅಧಿಕಾರಿ ಮತ್ತು ನೌಕರರು ಮೊದಲು ತಮ್ಮ ಸ್ವಯಂ ಗಣತಿಯನ್ನು ಪೂರ್ಣಗೊಳಿಸಬೇಕು ಎಂದು ತಿಳಿಸಿದರು.
ಆರೋಗ್ಯ ಇಲಾಖೆಯ ಡಿಎಚ್ಒ ಮತ್ತು ಟಿಎಚ್ಒಗಳು ತಮ್ಮ ಸಿಬ್ಬಂದಿಗಳ ಪಟ್ಟಿಯನ್ನು ಸಿದ್ಧಪಡಿಸಬೇಕು. ಶಿಕ್ಷಣ ಇಲಾಖೆಯ ಡಿಡಿಪಿಐ ಅವರು ಶಿಕ್ಷಕರು, ಅಕ್ಷರ ದಾಸೋಹ ಸಿಬ್ಬಂದಿ ಹಾಗೂ ಎಸ್ಡಿಎಂಸಿ ಸದಸ್ಯರನ್ನು ಈ ಪ್ರಕ್ರಿಯೆಯಲ್ಲಿ ಒಳಗೊಳ್ಳುವಂತೆ ಮಾಡಬೇಕು. ಹಾಗೆಯೇ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಿಡಿಒಗಳು, ಕಾರ್ಯದರ್ಶಿಗಳು ಮತ್ತು ಸದಸ್ಯರು ಸಕ್ರಿಯವಾಗಿ ಭಾಗವಹಿಸಬೇಕು.
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಅಡುಗೆ ಸಿಬ್ಬಂದಿ ಮತ್ತು ಸ್ವಚ್ಛತಾ ಕಾರ್ಮಿಕರು ಸೇರಿದಂತೆ ಪ್ರತಿಯೊಬ್ಬ ಸಿಬ್ಬಂದಿಯೂ ಸ್ವಯಂ ಗಣತಿಯಲ್ಲಿ ಪಾಲ್ಗೊಳ್ಳುವಂತೆ ಆಯಾ ಇಲಾಖಾ ಮುಖ್ಯಸ್ಥರು ಕ್ರಮ ಕೈಗೊಳ್ಳಬೇಕು. ಬಿಸಿಎಂ, ಸಮಾಜ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಇಲಾಖೆಯ ವಸತಿ ನಿಲಯಗಳಲ್ಲಿರುವ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಈ ಬಗ್ಗೆ ತರಬೇತಿ ನೀಡಿ, ಅವರು ತಮ್ಮ ಕುಟುಂಬದ ವಿವರಗಳನ್ನು ಆನ್ಲೈನ್ ಮೂಲಕ ದಾಖಲಿಸಲು ಪ್ರೋತ್ಸಾಹಿಸಬೇಕು ಎಂದು ಹೇಳಿದರು.
ಸ್ವಯಂ ಗಣತಿಯು ಅತ್ಯಂತ ಸರಳವಾಗಿದ್ದು, ಕುಟುಂಬದ ಮುಖ್ಯಸ್ಥರ ಹೆಸರು, ಮನೆಯ ಸ್ಥಿತಿಗತಿ, ಕುಡಿಯುವ ನೀರು ಮತ್ತು ವಿದ್ಯುತ್ ಸಂಪರ್ಕದಂತಹ ಮೂಲಭೂತ ಸೌಕರ್ಯಗಳ ಬಗ್ಗೆ ನಿಖರ ಮಾಹಿತಿ ಸಂಗ್ರಹಿಸುವುದು ಸರ್ಕಾರದ ಮುಂದಿನ ಯೋಜನೆಗಳ ರೂಪಿಸುವಿಕೆಗೆ ಅತ್ಯಗತ್ಯವಾಗಿದೆ ಎಂದು ತಿಳಿಸಿದರು.
ಏ.15 ರವರೆಗೆ ಸ್ವಯಂ ಗಣತಿಗೆ ಅವಕಾಶ ನೀಡಿದ್ದು, ಸಾರ್ವಜನಿಕರು ತಾವಾಗಿಯೇ ಆನ್ಲೈನ್ ಮೂಲಕ ಮಾಹಿತಿ ದಾಖಲಿಸಲು https://se.census.gov.inವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ತಮ್ಮ ವಿವರಗಳನ್ನು ದಾಖಲಿಸಬಹುದಾಗಿದ್ದು, ಸಾರ್ವಜನಿಕರು ಸ್ವಯಂ ಗಣತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಪೌರಾಯುಕ್ತೆ ಲಕ್ಷ್ಮೀ, ಚುನಾವಣಾ ತಹಶೀಲ್ದಾರ್ ಬೀಬೀ ಫಾತಿಮಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ರವಿಕುಮಾರ್, ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಎಂ.ರಾಘವೇಂದ್ರ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಜಿ.ಸವಿತಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಲ್ಲಿಕಾರ್ಜುನ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ರೇಖಾ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
